Ode to the west wind

Join Us on WhatsApp

Connect Here

ಕಂದಾಯ-ಅರಣ್ಯ ಭೂಮಿ, ಚಿಕ್ಕಮಗಳೂರು ಕಾಡಾನೆ‌: ಅರಣ್ಯ ಸಚಿವರ ಮಹತ್ವದ ಸಭೆ.

WhatsApp
Facebook
Twitter
LinkedIn

ರಾಜ್ಯದಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯ ವಿಚಾರದಲ್ಲಿ ಸಮಸ್ಯೆಗಳಿದ್ದು, ಇದನ್ನು ಜಂಟಿ ಸರ್ವೆಯ ಮೂಲಕ ಬಗೆಹರಿಸಬೇಕಾಗಿದೆ, ಪರಿಭಾವಿತ ಅರಣ್ಯ ಎಂದು ಘೋಷಿಸಲಾಗಿರುವ ಸರ್ವೆ ನಂಬರ್ ಮತ್ತು ಲಭ್ಯ ನಕ್ಷೆಯನ್ನು ಸಾರ್ವಜನಿಕವಾಗಿ ಲಭ್ಯವಾಗುವಂತೆ ಮಾಡುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.

ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹಾಗೂ ಜಿಲ್ಲೆಯ ಶಾಸಕರುಗಳೊಂದಿಗೆ ವಿಧಾನಸೌಧದ ಸಮಿತಿ ಸಭಾಂಗಣದಲ್ಲಿಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಭಾಗಿಯಾಗಿ, ಪರಿಭಾವಿತ (ಡೀಮ್ಡ್)ಅರಣ್ಯದ ವಿಚಾರದಲ್ಲಿ ಈಗಾಗಲೇ ಸುಪ್ರೀಂಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಲಾಗಿದೆ. 3.3 ಲಕ್ಷಕ್ಕೂ ಹೆಚ್ಚು ಪ್ರದೇಶವನ್ನು ಪರಿಭಾವಿತ ಅರಣ್ಯ ಎಂದು ಅಂತಿಮಗೊಳಿಸಲಾಗಿದೆ. ಇದರಲ್ಲೂ ಕೆಲವು ಪಟ್ಟಾ ಭೂಮಿ ಇದೆ, ಶಾಲೆ ಇದೆ ಎಂದು ಹೇಳಲಾಗುತ್ತಿದ್ದು, ಈಗ ಪ್ರತಿ ಜಿಲ್ಲೆಯಲ್ಲಿನ ಸಮಸ್ಯೆಗಳ ಬಗ್ಗೆ ಪ್ರತ್ಯೇಕ ಪ್ರಮಾಣಪತ್ರ ಸಲ್ಲಿಸಲು ಸಾಧ್ಯವಿಲ್ಲ. ಹೀಗಾಗಿ ಎಲ್ಲಾ ಜಿಲ್ಲಾಧಿಕಾರಿಗಳು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿ ಸರ್ವೇ ಮಾಡಿಸಿದಲ್ಲಿ ಎಲ್ಲ ಮಾಹಿತಿಯನ್ನೂ ಕ್ರೋಢೀಕರಿಸಿ ಮತ್ತೊಮ್ಮೆ ಸುಪ್ರೀಂಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಬಹುದು. ಆಗ ಮಾತ್ರ ಈ ಸಮಸ್ಯೆ ಪರಿಹರಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಡೀಮ್ಡ್ 1 ಎಂದು ಘೋಷಿಸಲಾಗಿದ್ದನ್ನು ಈಗಾಗಲೇ ಕೈಬಿಡಲಾಗಿದೆ. ಡೀಮ್ಡ್ 2 ಎಂದು ಘೋಷಿಸಿರುವುದು ಅಂತಿಮವಾಗಿದ್ದು, ಇದರಲ್ಲಿ ಏನಾದರೂ ಸಮಸ್ಯೆಗಳಿದ್ದರೆ ಅದನ್ನು ಪರಿಹರಿಸಲು ಪ್ರಯತ್ನಿಸಲಾಗುವುದು,  ಜಂಟಿ ಸಮೀಕ್ಷೆ ಪೂರ್ಣವಾಗುವವರೆಗೆ 4(1) ಪ್ರಕ್ರಿಯೆ ನಡೆಸದಂತೆ ಸೂಚಿಸುವುದಾಗಿ ಚಿಕ್ಕಮಗಳೂರು ಭಾಗದ ಶಾಸಕರುಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.

ಕಾಡಾನೆ‌ ಸಮಸ್ಯೆಗೆ ಪರಿಹಾರ ಸೂಚಿಸಿದ ಸಚಿವರು.

ಮಳೆ ಕೊರತೆಯಿಂದ ಕಾಡಾನೆಗಳ ಹಾವಳಿಯೂ ಹೆಚ್ಚಳವಾಗುತ್ತಿದ್ದು, ರೈಲ್ವೆ ಬ್ಯಾರಿಕೇಡ್ ಅಳವಡಿಕೆ ಇದಕ್ಕೆ ಸೂಕ್ತ ಪರಿಹಾರ ಮಾರ್ಗವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಇಲಾಖೆಗೆ ಸೂಚಿಸಲಾಗಿದೆ ಎಂದರು. ಚಿಕ್ಕಮಗಳೂರು ಭಾಗದಲ್ಲಿ ಬೀಡು ಬಿಟ್ಟಿರುವ ಆನೆಗಳನ್ನು ಕಾಡಿಗೆ ಮರಳಿಸಲು ಮತ್ತು ಪುಂಡಾನೆಯನ್ನು ಹಿಡಿದು ಆನೆ ಶಿಬಿರಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಮಾತನಾಡಿ, ಒಂದು ವಾರದೊಳಗೆ ಪರಿಭಾವಿತ ಅರಣ್ಯ, ಮೀಸಲು ಅರಣ್ಯದ ಮಾಹಿತಿಯನ್ನು ಸಾರ್ವಜನಿಕವಾಗಿ ಲಭ್ಯವಾಗುವಂತೆ ಮಾಡಲಾಗುವುದು. ಈಗ ಅತ್ಯಾಧುನಿಕ ಡ್ರೋನ್ ನಂತಹ ಸಲಕರಣೆ ಇದ್ದು, ಜಂಟಿ ಸರ್ವೆಯನ್ನು ಮಾಡಲು ಸಹಕರಿಸಲಾಗುವುದು ಎಂದು ತಿಳಿಸಿದರು.

You Might Also Like This